Tuesday, August 25, 2009

ಗ್ರಾಮೀಣ ಸಮಸ್ಯೆ ಬೆಳಕಿಗೆ ತನ್ನಿ: ಪಾಲೆಮಾರ‍್ ಕಿವಿಮಾತು


೨೦೦೮ನೇ ಸಾಲಿನ ಪ.ಗೋ ಪ್ರಶಸ್ತಿಯನ್ನು ಇಂದು ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಪರಿಸರ, ಜೀವಿಶಾಸ್ತ್ರ ಮತ್ತು ಬಂದರು ಖಾತೆ ಸಚಿವ ಕೃಷ್ಣಪಾಲೆಮಾರ‍್ ಅವರು ಪತ್ರಕರ್ತ ಹೃಷಿಕೇಶ್ ಧರ್ಮಸ್ಥಳ ಅವರಿಗೆ ಪ್ರದಾನ ಮಾಡಿದರು.

ಕನ್ನಡಪ್ರಭ ಉಜಿರೆ ವರದಿಗಾರರಾಗಿರುವ ಹೃಷಿಕೇಶ್ ಧರ್ಮಸ್ಥಳ ಅವರು ಬರೆದ ಬಾರದ ಸವಲತ್ತಿಗೆ ಕಾದಿದೆ ಜನತೆ ಎಂಬ ವರದಿ ೨೦೦೮ರ ಅಕ್ಟೋಬರ ೩ರಂದು ಪ್ರಕಟಗೊಂಡಿತ್ತು.

ಗ್ರಾಮೀಣ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಅಥವಾ ಅಲ್ಲಿನ ಧನಾತ್ಮಕ ಬೆಳವಣಿಗೆಗಳ ಬಗ್ಗೆ ಮಾಡಲಾದ ಅತ್ಯುತ್ತಮ ವರದಿಯನ್ನು ಪ.ಗೋ ಪ್ರಶಸ್ತಿಗೆ ಆರಿಸಲಾಗುತ್ತಿದೆ. ೧೯೯೯ರಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ. ಹಿರಿಯ ಪತ್ರಕರ್ತ ಪದ್ಯಾಣ ಗೋಪಾಲಕೃಷ್ಣರ ಹೆಸರಿನಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ.

ಹಿರಿಯ ಪತ್ರಕರ್ತ ಯು.ನರಸಿಂಹರಾವ್ ಅವರ ಸಮಕ್ಷಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ ಬಳಿಕ ಸಚಿವ ಕೃಷ್ಣ ಪಾಲೆಮಾರ‍್ ಮಾತನಾಡಿ, ಹಿಂದಿನ ಪತ್ರಕರ್ತರಂತೆ ಇಂದಿನ ಯುವ ಪತ್ರಕರ್ತರೂ ನಿಷ್ಠುರವಾಗಿದ್ದು ಗ್ರಾಮೀಣ ಸಮಸ್ಯೆಗಳನ್ನು ಬೆಳಕಿಗೆ ತರಬೇಕು ಎಂದು ಕಿವಿಮಾತು ಹೇಳಿದರು.

ಗ್ರಾಮಗಳಲ್ಲಿ ಆಗುವಂತಹ ಸಮಸ್ಯೆಗಳನ್ನು ವರದಿಗಾರರು ಗಮನಕ್ಕೆ ತಂದಾಗ ಸರ್ಕಾರಕ್ಕೂ ತಿಳಿಯುತ್ತದೆ, ಆ ಮೂಲಕ ಅವುಗಳನ್ನು ಬಗೆಹರಿಸಬಹುದು ಎಂದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಹರ್ಷ, ಪ್ರಧಾನ ಕಾರ್ಯದರ್ಶಿ ಗುರುವಪ್ಪ ಎನ್‌.ಟಿ ಬಾಳೆಪುಣಿ, ಪ್ರೆಸ್ ಕ್ಲಬ್ ಕಾರ್ಯದರ್ಶಿ ಹರೀಶ್ ರೈ, ಸಂಘದ ಖಜಾಂಚಿ ಯೋಗೀಶ ಹೊಳ್ಳ ಪಾಲ್ಗೊಂಡರು. ಪ.ಗೋ ಕುಟುಂಬದವರು, ನರಸಿಂಹರಾವ್ ಕುಟುಂಬಸ್ಥರೂ ಕಾರ್ಯಕ್ರಮದಲ್ಲಿ ಹಾಜರಿದ್ದರು

Monday, August 17, 2009

ಹೆಗ್ಗಡೆಯವರೊಂದಿಗೆ ಸಂವಾದ


ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರೊಂದಿಗೆ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಆ.೧೯ರಂದು ಸಂಜೆ ೪ ಗಂಟೆಗೆ ಸಂವಾದ ಏರ್ಪಡಿಸಲಾಗಿದೆ.

ಗ್ರಾಮೀಣಾಭಿವೃದ್ಧಿಯಲ್ಲಿ ತಮ್ಮ ಅನುಭವ, ಗ್ರಾಮೀಣಾಭಿವೃದ್ಧಿ ಯೋಜನೆ ಕುರಿತ ಕೆಲ ವಿಚಾರಗಳನ್ನು ಹೆಗ್ಗಡೆ ಅವರು ಸಂವಾದದಲ್ಲಿ ತೆರೆದಿಡಲಿದ್ದಾರೆ.
ಮಾಧ್ಯಮ ಮಿತ್ರರು ಎಂದಿನಂತೆ ಸಹಕರಿಸಬೇಕಾಗಿ ವಿನಂತಿ.

ಪ.ಗೋ ಪ್ರಶಸ್ತಿ ಮೊತ್ತದಲ್ಲಿ ಏರಿಕೆ

ಬಾರಿಯಿಂದ ಪ.ಗೋ ಪ್ರಶಸ್ತಿಗೆ ನೀಡುವ ಪ್ರಶಸ್ತಿ ಮೊತ್ತದಲ್ಲಿ ಏರಿಕೆಯಾಗಿದೆ.
೨೦೦೪ರಿಂದಲೇ ಪ್ರಶಸ್ತಿ ಮೊತ್ತವನ್ನು ಪ್ರಾಯೋಜಿಸುವ ಮೂಲಕ ಪ.ಗೋ ಟ್ರಸ್ಟ್‌ಗೆ ನೆರವಾಗುತ್ತಿದ್ದವರು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ.ವೀರೇಂದ್ರ ಹೆಗ್ಗಡೆಯವರು.

ಈ ಬಾರಿ ಪ್ರಶಸ್ತಿ ಮೊತ್ತವನ್ನು ಹೆಚ್ಚಿಸುವಂತೆ ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳು ಇತ್ತೀಚೆಗೆ ಶ್ರೀ ಹೆಗ್ಗಡೆಯವರ ಕಚೇರಿಗೆ ತೆರಳಿ ಮನವಿ ಮಾಡಿಕೊಂಡರು. ಪ್ರಶಸ್ತಿ ಮೊತ್ತ ಕಡಮೆಯಾಗಿದ್ದು, ಅದನ್ನು ಏರಿಸುವುದೇ ಸೂಕ್ತ ಎಂದು ಅಭಿಪ್ರಾಯಪಟ್ಟ ಹೆಗ್ಗಡೆಯವರು ಪ್ರಶಸ್ತಿ ಮೊತ್ತವನ್ನು ೫೦೦೧ ರು.ಗೆ ಏರಿಸಲು ಒಪ್ಪಿಕೊಂಡರು. ಅವರ ಮಾರ್ಗದರ್ಶನಕ್ಕೆ ಪತ್ರಕರ್ತರ ಸಂಘ ಆಭಾರಿ. ಸಂಘದ ಅಧ್ಯಕ್ಷ ಹರ್ಷ, ಪ್ರಧಾನ ಕಾರ್ಯದರ್ಶಿ ಗುರುವಪ್ಪ ಬಾಳೆಪುಣಿ, ಖಜಾಂಚಿ ಯೋಗೀಶ್ ಹೊಳ್ಳ, ಮಂಗಳೂರು ಪ್ರೆಸ್‌ ಕ್ಲಬ್‌ ಜತೆ ಕಾರ್ಯದರ್ಶಿ ಶ್ರೀನಿವಾಸ್ ನಾಯಕ್ ಇಂದಾಜೆ ನಿಯೋಗದಲ್ಲಿದ್ದರು.

ಹೃಷಿಕೇಶ್‌ಗೆ ಪ.ಗೋ ಪ್ರಶಸ್ತಿ

ದಿವಂಗತರಾಗಿರುವ ಹಿರಿಯ ಪತ್ರಕರ್ತ ಪದ್ಯಾಣ ಗೋಪಾಲಕೃಷ್ಣ ಅವರ ನೆನಪಿನಲ್ಲಿ ಅತ್ಯುತ್ತಮ ಗ್ರಾಮೀಣವರದಿಗಾರಿಕೆ ಪ್ರಶಸ್ತಿಗೆ ಈ ಬಾರಿ ಕನ್ನಡಪ್ರಭ ಪತ್ರಿಕೆಯ ಧರ್ಮಸ್ಥಳ-ಉಜಿರೆ ಸುದ್ದಿಗಾರ ಹೃಷಿಕೇಶ್ ಧರ್ಮಸ್ಥಳ ಆಯ್ಕೆಯಾಗಿದ್ದಾರೆ.

ಕನ್ನಡಪ್ರಭದಲ್ಲಿ ಅಕ್ಟೋಬರ‍್ ೩, ೨೦೦೮ರಲ್ಲಿ ಪ್ರಕಟಗೊಂಡ ಬಾರದ ಸವಲತ್ತಿಗೆ ಕಾದಿದೆ ಜನತೆ ಎಂಬ ವರದಿ ಪ್ರಶಸ್ತಿ ಗಳಿಸಿದೆ. ಇದು ೨೦೦೮ರ ಸಾಲಿನ ಪ್ರಶಸ್ತಿಯಾಗಿರುತ್ತದೆ.
ಗ್ರಾಮೀಣಮಟ್ಟದಲ್ಲಿ ಇರುವ ಅನೇಕ ಸಮಸ್ಯೆಗಳು, ಅಭಿವೃದ್ಧಿಗೆ ಗ್ರಾಮೀಣ ಭಾಗದಲ್ಲಿರುವ ಮಾದರಿಗಳು ಇತ್ಯಾದಿಗಳ ಬಗ್ಗೆ ಬರೆಯಲಾದ ಅತ್ಯುತ್ತಮ ವರದಿಗಳಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.

ಶ್ರೀ ಪದ್ಯಾಣ ಗೋಪಾಲಕೃಷ್ಣ ( ಪ.ಗೋ. ೧೯೨೮ - ೧೯೯೭ ) - ಹುಟ್ಟೂರು ಗಡಿಯಂಚಿನಲ್ಲಿರುವ ಅಡ್ಯನಡ್ಕ. ೧೯೫೬ ರಿಂದ ೧೯೯೭ನೇ ಇಸವಿಯವರೆಗೆ ನಾಲ್ಕು ದಶಕಗಳಷ್ಟು ಧೀರ್ಘ ಕಾಲಾವಧಿಯಲ್ಲಿ ಹಲವು ಕನ್ನಡ ಪತ್ರಿಕೆಗಳ ಉಪಸಂಪಾದಕ, ವರದಿಗಾರರಾಗಿದ್ದ ಪ.ಗೋ.ರವರು ೧೯೬೩ರಿಂದ ಸುಮಾರು ಎರಡು ವರ್ಷಗಳ ಕಾಲ ಮಂಗಳೂರಿನಿಂದ ತಮ್ಮ ಸ್ವಂತ ಕನ್ನಡ ದಿನ ಪತ್ರಿಕೆ "ವಾರ್ತಾಲೋಕ"ದ ವರದಿಗಾರ, ಮುದ್ರಕ ಮತ್ತು ಪ್ರಕಾಶಕರಾಗಿ ನಡೆಸಿ ಪತ್ರಿಕೋದ್ಯಮದ ಎಲ್ಲಾ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸಿದವರು. ಜೊತೆಗೆ ೧೩ ಪತ್ರಿಕೆಗಳಿಗೆ ಆಗಾಗ ಅಂಕಣ ಬರೆಯುತ್ತಿದ್ದವರು.
ಪ.ಗೋ ಸ್ಮಾರಕಾರ್ಥವಾಗಿ ಟ್ರಸ್ಟಿನ ವತಿಯಿಂದ ೧೯೯೯ರಲ್ಲಿ ಪ್ರಾರಂಭಿಸಿದ ಉತ್ಕೃಷ್ಟ ಗ್ರಾಮೀಣ ವರದಿಗೆ ನೀಡುವ ಪ.ಗೋ. ಸಂಸ್ಮರಣ ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಯನ್ನು ಈಗ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮುನ್ನಡೆಸುವ ನಿರ್ಣಯವನ್ನು ಹಮ್ಮಿಕೊಂಡಿದೆ. ಈ ವರ್ಷ ಮೊದಲ ಬಾರಿಗೆ ಪತ್ರಕರ್ತರ ಸಂಘ ಪ್ರಶಸ್ತಿ ನೀಡುತ್ತಿದೆ.